ಪುನೀತ್ ರಾಜ್ಕುಮಾರ್ ಅವರಿಗೆ ನಮನ ಸಲ್ಲಿಸುವ ಸಲುವಾಗಿ ಕನ್ನಡ ಚಿತ್ರರಂಗದ ಕಡೆಯಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ‘ಪುನೀತ್ ನಮನ’ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ‘ಪುನೀತ್ ನಮನ’ ಕಾರ್ಯಕ್ರಮ ನಡೆಯಿತು. ‘ಪುನೀತ್ ನಮನ’ ಕಾರ್ಯಕ್ರಮದಲ್ಲಿ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ಕುಮಾರ್ ಅಶ್ವಿನಿ ಪುನೀತ್ ರಾಜ್ಕುಮಾರ್ ಸೇರಿದಂತೆ ಇಡೀ ರಾಜ್ ಕುಟುಂಬ ಪಾಲ್ಗೊಂಡಿತ್ತು.
‘ಪುನೀತ್ ನಮನ’ ಕಾರ್ಯಕ್ರಮದಲ್ಲಿ ಕಿರಿಯ ಸಹೋದರ ಪುನೀತ್ ರಾಜ್ಕುಮಾರ್ ಅವರನ್ನು ನೆನೆದು ರಾಘವೇಂದ್ರ ರಾಜ್ಕುಮಾರ್, ಪುನೀತ್ ರಾಜ್ಕುಮಾರ್ ಕಣ್ಣೀರು ಹಾಕಿದ್ದರು. ‘ಪುನೀತ್ ನಮನ’ ಕಾರ್ಯಕ್ರಮದಲ್ಲಿ ಪತಿಯನ್ನು ನೆನೆದು ಕಣ್ಣೀರಿಟ್ಟಿದ್ದ ಅಶ್ವಿನಿ ಪುನೀತ್ ರಾಜ್ಕುಮಾರ್ ಇದೀಗ ಸಹೃದಯಿ ಅಭಿಮಾನಿ ದೇವರುಗಳಿಗೆ ಭಾವುಕ ಪತ್ರ ಬರೆದಿದ್ದಾರೆ.

‘’ಶ್ರೀ ಪುನೀತ್ ರಾಜ್ಕುಮಾರ್ ಅವರ ಅಕಾಲಿಕ ಅಗಲಿಕೆ ನಮಗಷ್ಟೇ ಅಲ್ಲದೇ ಇಡೀ ರಾಜ್ಯಕ್ಕೆ ಆಘಾತಕಾರಿ ವಿಷಯ. ನಿಷ್ಕಲ್ಮಶ ಪ್ರೀತಿಯಿಂದ, ಅಕ್ಕರೆಯ ಅಭಿಮಾನದಿಂದ ಅವರನ್ನು ‘ಪವರ್ ಸ್ಟಾರ್’ ಆಗಿ ರೂಪಿಸಿದ್ದ ನಿಮ್ಮೆಲ್ಲರಿಗೆ ಅವರ ವಿದಾಯ ತಂದಿತ್ತ ದುಃಖ ಎಷ್ಟಿರಬಹುದೆಂದು ಊಹಿಸಲು ಸಾಧ್ಯವಿಲ್ಲ. ಆದರೂ ಇಂತಹ ಸಂದರ್ಭದಲ್ಲಿ ನೀವುಗಳು ಎಲ್ಲಿಯೂ ಸಂಯಮ ಕಳೆದುಕೊಳ್ಳದೇ, ಅಹಿತಕರ ಘಟನೆಗಳು ನಡೆಯಲು ಬಿಡದೇ ಅವರಿಗೊಂದು ಅತ್ಯಂತ ಗೌರವಯುವ ಬೀಳ್ಕೊಡುಗೆ ನೀಡುವಲ್ಲಿ ಸಹಕರಿಸಿದ್ದಿರಿ. ಸಿನಿಮಾ ಪ್ರೇಮಿಗಳಷ್ಟೇ ಅಲ್ಲದೇ, ವಯೋಮಾನದ ಮಿತಿಯಿಲ್ಲದೇ, ದೇಶ ವಿದೇಶಗಳಿಂದ ಕೋಟ್ಯಂತರ ಜನರು ಸಂತಾಪ ಸೂಚಿಸುವುದನ್ನು ಕಂಡಾಗ ಮನಸ್ಸು ಭಾರವಾಗುತ್ತದೆ. ನಿಮ್ಮ ಪ್ರೀತಿಯ ಅಪ್ಪು ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯುತ್ತಾ ಸಾವಿರಾರು ಸಂಖ್ಯೆಯಲ್ಲಿ ನೇತ್ರದಾನಕ್ಕೆ ನೋಂದಣಿ ಮಾಡಿಸುವುದನ್ನು ನೋಡಿದಾಗ ಕಣ್ತುಂಬಿ ಬರುತ್ತದೆ. ಅವರನ್ನು ಆದರ್ಶವಾಗಿಟ್ಟುಕೊಂಡು ನೀವುಗಳು ಮಾಡುವ ಸತ್ಕಾರ್ಯಗಳಲ್ಲಿ, ಅವರ ನೆನಪುಗಳು ನಿಮ್ಮಲ್ಲಿ ಮೂಡಿಸುವ ಉತ್ಸಾಹದಲ್ಲಿ ಅವರೆಂದಿಗೂ ಜೀವಂತವಾಗಿರುತ್ತಾರೆ. ವಿಶ್ವದಾದ್ಯಂತ ನಮ್ಮ ಶೋಕವನ್ನು ಹಂಚಿಕೊಂಡು ಬೆಂಬಲಕ್ಕೆ ನಿಂತ ಎಲ್ಲಾ ಸಹೃದಯಿ ಅಭಿಮಾನಿ ದೇವರುಗಳು ಮತ್ತು ಸಾರ್ವಜನಿಕರಿಗೆ ನಮ್ಮ ಇಡೀ ಕುಟುಂಬದ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು’’ ಎಂದು ಪತ್ರದಲ್ಲಿ ಅಶ್ವಿನಿ ಪುನೀತ್ ರಾಜ್ಕುಮಾರ್ ಉಲ್ಲೇಖಿಸಿದ್ದಾರೆ.
****