ಸ್ಯಾಂಡಲ್ ವುಡ್ ನ ಹಿರಿಯ ನಟ ಶಿವರಾಮ್ (84) ಅವರ ಸಾವಿಗೆ ಶಿವರಾಜಕುಮಾರ್ ಕಂಬನಿ ಮಿಡಿದಿದ್ದಾರೆ. ಅಣ್ಣಾವ್ರ ಕುಟುಂಬಕ್ಕೆ ತುಂಬ ಪ್ರೀತಿ ಪಾತ್ರರಾಗಿದ್ದ ನಟ ಶಿವರಾಮ್ ಅವರ ಸಾವಿಗೆ ಶಿವಣ್ಣ ಮರುಗಿದ್ದಾರೆ.
ನಟ ಶಿವರಾಜಕುಮಾರ್ ಅವರು ಕಳೆದ ಕೆಲವು ದಿನಗಳಿಂದ ತೀವ್ರ ನೋವಿನಲ್ಲಿದ್ದಾರೆ. ಪುನೀತ್ ರಾಜಕುಮಾರ್ ಅವರ ನಿಧನದಿಂದ ಇಡೀ ರಾಜ್ ಕುಟುಂಬ ಕಣ್ಣೀರು ಸುರಿಸುತ್ತಿದೆ. ಅಪ್ಪು ಇಹಲೋಕ ತ್ಯಜಿಸಿ ಒಂದು ತಿಂಗಳು ಕಳೆದಿದೆ. ಅಷ್ಟರೊಳಗೆ ಮತ್ತೊಂದು ಕಹಿ ಸುದ್ದಿ ಕೇಳಿಬಂದಿದೆ. ಡಾ. ರಾಜಕುಮಾರ್ ಕುಟುಂಬಕ್ಕೆ ತುಂಬ ಆಪ್ತರಾಗಿದ್ದ ಹಿರಿಯ ನಟ ಶಿವರಾಂ ಅವರು ತೀವ್ರ ಅನಾರೋಗ್ಯದಿಂದ ಇಂದು ಪ್ರಶಾಂತ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಶಿವರಾಜ್ಕುಮಾರ್ ಅವರು ನಿನ್ನೆ (ಡಿ.3) ರಂದು ಆಸ್ಪತ್ರೆಗೆ ಭೇಟಿ ನೀಡಿ ಶಿವರಾಂ ಅವರ ಆರೋಗ್ಯ ವಿಚಾರಿಸಿದ್ದರು, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಣ್ಣ, ‘ಅವರ ಫ್ಯಾಮಿಲಿಗೆ ಧೈರ್ಯ ಹೇಳುತ್ತೇನೆ. ನಾನು ಕೂಡ ಅವರ ಕುಟುಂಬದ ಸದಸ್ಯ ಆಗಿರುವುದರಿಂದ ನಮಗೂ ಎಲ್ಲರೂ ಧೈರ್ಯ ಹೇಳಬೇಕು. ಒಂದು ತಿಂಗಳ ಹಿಂದಷ್ಟೇ ತಮ್ಮನನ್ನು ಕಳೆದುಕೊಂಡಿದ್ದೇನೆ. ದೇವರು ಪದೇಪದೇ ಯಾಕೆ ಈ ರೀತಿ ನೋವು ಕೊಡುತ್ತಾನೆ ಅಂತ ನಮಗೂ ಅರ್ಥ ಆಗುವುದಿಲ್ಲ’ ಎಂದಿದ್ದಾರೆ ಶಿವಣ್ಣ.
ಶಿವರಾಜ್ಕುಮಾರ್ ಮತ್ತು ಶಿವರಾಂ ಅವರು ಅನೇಕ ಬಾರಿ ಒಟ್ಟಾಗಿ ಶಬರಿಮಲೆಗೆ ಹೋಗಿ ಬಂದಿದ್ದುಂಟು. ಅದನ್ನು ಶಿವಣ್ಣ ಮೆಲುಕು ಹಾಕಿದ್ದಾರೆ. ‘ಒಂದು ವರ್ಷದಲ್ಲಿ ಮೂರು-ನಾಲ್ಕು ಬಾರಿ ಶಿವರಾಂ ಅವರು ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಹೋಗುತ್ತಾರೆ. ನಮ್ಮ ಜೊತೆಯೂ ಹೋಗಿ ಬರುತ್ತಿದ್ದರು. ಸ್ನೇಹಿತರು ಯಾರಾದರೂ ಅಯ್ಯಪ್ಪ ಸ್ವಾಮಿ ಪೂಜೆ ಮಾಡಿದಾಗಲೂ ಹೋಗುತ್ತಾರೆ. ಅಯ್ಯಪ್ಪ ಸ್ವಾಮಿ ಎಂದರೆ ಶಿವರಾಂ ಅವರಿಗೆ ಏನೋ ವಿಶೇಷ ಪ್ರೀತಿ. ಮೂರು ವರ್ಷದ ಹಿಂದೆ ಶಬರಿಮಲೆಗೆ ಹೋಗಿದ್ವಿ. ಕೋವಿಡ್ ಬಂದ ನಂತರ ಹೋಗಲು ಸಾಧ್ಯವಾಗಿರಲಿಲ್ಲ.
ಆಗ ಅವರಿಗೆ 81 ವರ್ಷ. ಆ ವಯಸ್ಸಿನಲ್ಲೂ ಅವರು ಬೆಟ್ಟ ಹತ್ತುತ್ತಿದ್ದರು. ಅವರಲ್ಲಿ ಇರುವ ಆ ಮನೋಬಲವೇ ಅವರನ್ನು ಕಾಪಾಡುತ್ತದೆ ಎಂದುಕೊಂಡಿದ್ದೇನೆ. ಆ ದೇವರು ಅವರನ್ನು ಕಾಪಾಡಬೇಕು ಎಂಬುದೇ ನಮ್ಮ ಆಸೆ. ಕರ್ನಾಟಕದ ಜನತೆಯ ಪ್ರೀತಿ-ಅಭಿಮಾನದಿಂದ ಅವರು ಗುಣಮುಖರಾಗುತ್ತಾರೆ’ ಎಂದು ಹೇಳಿದ್ರು ಶಿವಣ್ಣ ಆದ್ರೆ ಕೋಟ್ಯಾಂತರ ಅಭಿಮಾನಿಗಳ ಪ್ರಾರ್ಥನೆ ಕೊನೆಗೂ ಪಲಿಸಲಿಲ್ಲಾ.
****